ಹಿಂದೂ ಮುಸ್ಲಿಂ ಭಾವೈಕ್ಯತೆಗೆ ಶ್ರಮಿಸಿದ ಪತ್ರಕರ್ತ ಮೌಲಾನಾ ಅಬುಲ್ ಕಲಾಂ ಜಯಂತಿ ಆಚರಣೆ
ಕಂಪ್ಲಿಯ ಹೊಸ ಬಸ್ ನಿಲ್ದಾಣದ ಬಳಿ ಇರುವ ಸರ್ಕಲ್ ಗೆ ಸ್ವಾತಂತ್ರ್ಯ ಹೋರಾಟಗಾರರಲ್ಲಿ ಪ್ರಮುಖರಾಗಿದ್ದ ಮೌಲಾನಾ ಅಬುಲ್ ಕಲಾಂ ರವರ ಜಯಂತಿಯನ್ನು ಹಿಂದೂ ಮುಸ್ಲಿಂ ಸಮುದಾಯದ ಯುವಕರು ಸೇರಿ ಆಚರಿಸುವ ಮೂಲಕ ಭಾವೈಕ್ಯ ಮೆರೆದಿದ್ದಾರೆ.
(((ನಿಮಗಿದು ತಿಳಿದಿರಲಿ)))
ಭಾರತದ ಸ್ವಾತಂತ್ರ್ಯ ಚಳುವಳಿಯಲ್ಲಿ ಮಹಾತ್ಮಗಾಂಧಿಯವರ ಜೊತೆಗಾರರಾಗಿದ್ದ ಪ್ರಮುಖರಲ್ಲಿ ಮೌಲಾನಾ ಅಬುಲ್ ಕಲಾಂ ರವರ ಜಯಂತಿಯನ್ನು ಆಚರಿಸಲಾಯಿತು.
ಪತ್ರಕರ್ತರಾಗಿ ಬ್ರಿಟಿಷ್ ಆಡಳಿತ ವಿರುದ್ಧ ಬರೆಯುತ್ತಿದ್ದ ಲೇಖನಗಳಿಂದ ಮೌಲಾನಾ ಆಜಾದರು ಪ್ರಸಿದ್ಧಿ ಪಡೆದಿದ್ದರು. ಖಿಲಾಫತ್ ಚಳುವಳಿಯ ನೇತೃತ್ವ ವಹಿಸಿದ್ದ ಆಜಾದರು ಮಹಾತ್ಮ ಗಾಂಧೀಜಿಯವರ ನಿಕಟವರ್ತಿಗಳಾದರು. ಮಹಾತ್ಮರು ಆಯೋಜಿಸಿದ್ದ ಅಸಹಕಾರ ಚಳುವಳಿಯಲ್ಲಿ ಅತ್ಯಂತ ಕ್ರಿಯಾಶೀಲ ಯುವಕ ಎಂದು ಹೆಸರಾದರು.
ಅಕ್ಟೋಬರ್ 1920 ರಂದು ಅವರನ್ನು 'ಜಾಮಿಯಾ ಮಿಲಿಯಾ ಇಸ್ಲಾಮಿಯಾ' ಸ್ಥಾಪನಾ ಸಮಿತಿಗೆ ಆಯ್ಕೆ ಮಾಡಲಾಯಿತು. ಆಲೀಘಡದಲ್ಲಿ ಸ್ಥಾಪಿಸಲಾದ ಈ ವಿಶ್ವವಿದ್ಯಾನಿಲಯವನ್ನು ದಿಲ್ಲಿಗೆ ಸ್ಥಳಾಂತರಿಸಿದರು. ಈ ವಿಶ್ವವಿದ್ಯಾಲಯದ ಮುಖ್ಯ ದ್ವಾರಕ್ಕೆ ಇವರ ಹೆಸರನ್ನೇ ಇಡಲಾಗಿದೆ.
ಗಾಂಧೀಜಿಯವರ ‘ಸ್ವದೇಶಿ’, ‘ಸ್ವರಾಜ್’ ಚಿಂತನೆಗಳಿಗೆ ಮಾರು ಹೋಗಿ ಅವರ ಜೊತೆ ನಿರಂತರವಾಗಿದ್ದ ಅಬ್ದುಲ್ ಕಲಾಂ 1927ರ ವರ್ಷದಲ್ಲಿ ತಮ್ಮ 35ನೇ ವಯಸ್ಸಿನಲ್ಲಿಯೇ ರಾಷ್ಟ್ರೀಯ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಅತ್ಯಂತ ಕಿರು ವಯಸ್ಸಿನವರಾಗಿದ್ದರು.
1931ರ ವರ್ಷದಲ್ಲಿ ‘ಧರಾಸಣಾ ಸತ್ಯಾಗ್ರಹ’ದ ಪ್ರಮುಖ ಆಯೋಜಕರಾಗಿದ್ದ ಮೌಲಾನ ಹಲವಾರು ಕಠಿಣ ಸೆರೆವಾಸಗಳನ್ನು ಕಂಡರು. ಕ್ವಿಟ್ ಇಂಡಿಯಾ ಚಳುವಳಿಯ ಸಂದರ್ಭದಲ್ಲಿ ಮೂರು ವರ್ಷಗಳ ಕಾಲ ಸತತವಾಗಿ ಸೆರೆಯಲ್ಲಿಯೇ ಇದ್ದರು. ಸ್ವಾತಂತ್ರ್ಯದ ಸಮಯದಲ್ಲಿ ದೇಶದ ವಿಭಜನೆಯ ಕೂಗನ್ನು ಬೆಂಬಲಿಸದಿದ್ದ ಅವರು ಭಾರತದ ಪರವಾಗಿಯೇ ಇದ್ದರು. ಸ್ವಾತಂತ್ರ್ಯಕ್ಕೆ ಮುಂಚೆಯೇ, ಪಾಕಿಸ್ತಾನ ರಾಷ್ಟ್ರವಾದರೆ ಅಲ್ಲಿ ಪ್ರಜಾಪ್ರಭುತ್ವ ನಿರ್ಮಾಣವಾಗದೆ ಮಿಲಿಟರಿ ಆಡಳಿತವೇ ಗತಿಯಾಗುತ್ತದೆ ಎಂಬ ಎಚ್ಚರಿಕೆ ಸಹ ನೀಡಿದ್ದರು.
'ಅಲ್ ಹಿಲಾಲ್' ಪತ್ರಿಕೆಯ ಮುಖಾಂತರ ಹಿಂದೂ ಮುಸ್ಲಿಂ ಭಾವೈಕ್ಯತೆಗೆ ಶ್ರಮಿಸಿದರು.