ಕಂಪ್ಲಿ: ರಾಯಚೂರು ಜಿಲ್ಲೆಯ ಸಿರವಾರ ತಾಲೂಕಿನ ಹೊಕ್ರಾಣಿ ಗ್ರಾಮದ ದಲಿತ ಯುವತಿ ಅಶ್ವಿನಿ ಅವರ ಮೇಲೆ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಪ್ರಕರಣವನ್ನು ಖಂಡಿಸಿ, ಬಿಜೆಪಿ ಕಂಪ್ಲಿ ಮಂಡಲ ಎಸ್ಸಿ ಮೋರ್ಚಾ ಅಧ್ಯಕ್ಷ ಸಿ.ಎ ಚನ್ನಪ್ಪ ನೇತೃತ್ವದಲ್ಲಿ ತಹಶೀಲ್ದಾರರ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.
ಬಯಲು ಶೌಚಾಲಯಕ್ಕೆ ತೆರಳಿದ್ದ ಯುವತಿಯನ್ನು ಅಪಹರಿಸಿ ಅತ್ಯಾಚಾರ ಎಸಗಿ ಕೊಲೆ ಮಾಡಿರುವ ಆರೋಪಿಗಳಿಗೆ ತಕ್ಷಣ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಲಾಯಿತು. ಮಹಿಳೆಯರು ಹಾಗೂ ದಲಿತರ ಸುರಕ್ಷತೆಗೆ ಸರ್ಕಾರ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಲಾಯಿತು.
ಪ್ರಕರಣವನ್ನು ಫಾಸ್ಟ್ಟ್ರ್ಯಾಕ್ ನ್ಯಾಯಾಲಯಕ್ಕೆ ವಹಿಸಬೇಕು, ರಾಯಚೂರು ಜಿಲ್ಲೆಯನ್ನು ‘ಅತಿಸೂಕ್ಷ್ಮ ಜಿಲ್ಲೆ’ ಎಂದು ಘೋಷಿಸಬೇಕು, ಪ್ರತಿ ಗ್ರಾಮದಲ್ಲಿ ಸಿಸಿ ಕ್ಯಾಮೆರಾ ಹಾಗೂ ಬೀದಿ ದೀಪಗಳ ವ್ಯವಸ್ಥೆ ಕಲ್ಪಿಸಬೇಕು ಮತ್ತು ಪ್ರತಿ ಮನೆಗೂ ಶೌಚಾಲಯ ನಿರ್ಮಿಸಬೇಕು ಎಂಬ ಬೇಡಿಕೆಗಳನ್ನು ಮುಂದಿಡಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿಯ ಶ್ರೀನಿವಾಸ್, ಪ್ರಶಾಂತ್, ಮುರಳಿ ಮೋಹನ್, ಮಂಜುಳಾ, ಕಟ್ಟೆ ವಿಶ್ವನಾಥ್, ರಾಮಾಂಜಿನೇಯಲು, ಬಸವಪ್ರಭು ಸೇರಿದಂತೆ ಅನೇಕ ಕಾರ್ಯಕರ್ತರು ಉಪಸ್ಥಿತರಿದ್ದರು.
