ಬಳ್ಳಾರಿ ಜಿಲ್ಲೆಯಾದ್ಯಂತ ಗೌರಿ-ಗಣೇಶ ಹಬ್ಬಕ್ಕೆ ಡಿಜೆ ಸೌಂಡ್ ಸಿಸ್ಟಂ ಸಂಪೂರ್ಣ ನಿಷೇಧ: ಜಿಲ್ಲಾಧಿಕಾರಿ ಕಟ್ಟುನಿಟ್ಟಿನ ಆದೇಶ
ಬಳ್ಳಾರಿ, ಸೆ.11: ಗೌರಿ-ಗಣೇಶ ಹಬ್ಬದ ಆಚರಣೆ ಹಾಗೂ ವಿಸರ್ಜನಾ ಮೆರವಣಿಗೆಗಳ ಸಂದರ್ಭದಲ್ಲಿ ಸಾರ್ವಜನಿಕ ಶಾಂತಿ, ಕಾನೂನು-ಸುವ್ಯವಸ್ಥೆ ಮತ್ತು ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಬಳ್ಳಾರಿ ಜಿಲ್ಲೆಯಾದ್ಯಂತ ಡಿಜೆ ಹಾಗೂ ಹೈ-ಬೇಸ್ ಸೌಂಡ್ ಸಿಸ್ಟಂ ಬಳಕೆಯನ್ನು ಸಂಪೂರ್ಣವಾಗಿ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿಗಳಾದ ಕೆ. ನಾಗೇಂದ್ರ ಪ್ರಸಾದ್ ಅವರು ಆದೇಶ ಹೊರಡಿಸಿದ್ದಾರೆ.
‘ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ-2023’ರ ಕಲಂ 152 ಮತ್ತು 163ರ ಅಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ನಿಷೇಧಾಜ್ಞೆ ಜಾರಿಗೊಳಿಸಲಾಗಿದ್ದು, ಸೆಪ್ಟೆಂಬರ್ 14ರಿಂದ ಗೌರಿ-ಗಣೇಶ ಹಬ್ಬ ಮುಕ್ತಾಯವಾಗುವವರೆಗೆ ಜಿಲ್ಲೆಯಾದ್ಯಂತ ಈ ಆದೇಶ ಜಾರಿಯಲ್ಲಿರಲಿದೆ.
ಗಣೇಶ ಮೂರ್ತಿ ಪ್ರತಿಷ್ಠಾಪನೆ ಹಾಗೂ ವಿಶೇಷವಾಗಿ ವಿಸರ್ಜನಾ ಮೆರವಣಿಗೆಗಳ ವೇಳೆ ಅತಿಯಾದ ಶಬ್ದ ಉಂಟುಮಾಡುವ ಡಿಜೆ ಬಾಕ್ಸ್ಗಳಿಂದ ಶಬ್ದ ಮಾಲಿನ್ಯ ಹೆಚ್ಚಾಗುವ ಸಾಧ್ಯತೆ ಇದೆ. ಇದರಿಂದ ವಯೋವೃದ್ಧರು, ಚಿಕ್ಕ ಮಕ್ಕಳು, ಬಾಣಂತಿಯರು ಹಾಗೂ ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿರುವವರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಉಂಟಾಗಬಹುದು ಎಂದು ಜಿಲ್ಲಾ ಪೊಲೀಸ್ ಅಧೀಕ್ಷಕರು ಸಲ್ಲಿಸಿದ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ಈ ವರದಿಯ ಆಧಾರದ ಮೇಲೆ ಜಿಲ್ಲೆಯಾದ್ಯಂತ ಡಿಜೆ ಸೌಂಡ್ ಸಿಸ್ಟಂ, ಹೈ-ಬೇಸ್ ಸಿಸ್ಟಂ, ಡಿಜೆ ಬಾಕ್ಸ್ಗಳು ಹಾಗೂ ಹೆಚ್ಚಿನ ಶಬ್ದ ಉಂಟುಮಾಡುವ ಯಾವುದೇ ಧ್ವನಿವರ್ಧಕ ಉಪಕರಣಗಳ ಬಳಕೆಯನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ. ನಾಗೇಂದ್ರ ಪ್ರಸಾದ್ ತಿಳಿಸಿದ್ದಾರೆ.
ಆದೇಶ ಉಲ್ಲಂಘಿಸುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಡಳಿತ ಎಚ್ಚರಿಕೆ ನೀಡಿದೆ.
